
ಅಸುಂಡಿ, ಫೆ.16: ಅಸುಂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST) ಹಾಗೂ ಅಲ್ಪಸಂಖ್ಯಾತರ ಕಾಲೋನಿಗಳಲ್ಲಿ ಉಂಟಾಗಿರುವ ಕುಡಿಯುವ ನೀರಿನ ತೀವ್ರ ಸಮಸ್ಯೆ ಕುರಿತು ಕರ್ನಾಟಕ ಯುವರಕ್ಷಣಾ ವೇದಿಕೆ (ಅಸುಂಡಿ ಗ್ರಾಮ ಘಟಕ) ವತಿಯಿಂದ ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಲಾಗಿತ್ತು.
ಮನವಿಯಲ್ಲಿ, ಪರಿಶಿಷ್ಟ ಜಾತಿ ಕಾಲೋನಿಯಲ್ಲಿರುವ ಡಾ|| ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದ ನೀರಿನ ಟ್ಯಾಂಕ್ಗೆ ಸಮರ್ಪಕ ನೀರಿನ ಪೂರೈಕೆ ನಡೆಯುತ್ತಿಲ್ಲ ಎಂದು ದೂರಲಾಗಿದೆ. ಹಾಗೆಯೇ ಶ್ರೀ ಫಕ್ಕೀರೇಶ್ವರ ದೇವಸ್ಥಾನದ ಆವರಣದಲ್ಲಿರುವ ನೀರಿನ ಟ್ಯಾಂಕ್ ಗೆ ಬಾವಿ ನೀರು ಬಿಡಲಾಗಿದು ಅದು ಕುಡಿಯಲು ಯೋಗ್ಯ ಇಲ್ಲದೆ ಇರುವ ಕಾರಣದಿಂದ ಸ್ಥಳೀಯ ನಿವಾಸಿಗಳು ಕುಡಿಯುವ ನೀರಿಗಾಗಿ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ತಿಳಿಸಲಾಗಿದೆ.
ಈ ಹಿನ್ನೆಲೆಯಲ್ಲಿ, 16-02-2026 ರಂದು ಅಸುಂಡಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿಯಾದ ಮಹಾದೇವಗೌಡ ಫ ಭಾರಮಗೌಡ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಮಸ್ಯೆಯನ್ನು ತುರ್ತುವಾಗಿ ಪರಿಹರಿಸಲಾಗುವುದು ಹಾಗೂ ಒಂದು ವಾರದೊಳಗೆ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಮಾಡಿಕೊಡಲಾಗುವುದು ಎಂದು ಅವರು ಭರವಸೆ ನೀಡಿದರು.
ಗ್ರಾಮಸ್ಥರು ತ್ವರಿತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದು, ಗ್ರಾಮ ಪಂಚಾಯಿತಿಯ ಭರವಸೆಯಂತೆ ಶೀಘ್ರದಲ್ಲೇ ನೀರಿನ ಸಮಸ್ಯೆ ಬಗೆಹರಿಯಲಿದೆ ಎಂಬ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ.
